ಬಳ್ಳಾರಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಮರ್ಥನಂ ಅಂಗವಿಕಲರ ಸಂಸ್ಥೆಯ ಆವರಣದಲ್ಲಿ ಶನಿವಾರ ರಾಷ್ಟ್ರೀಯ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಸೆಂಟರ್ ಹೆಡ್ ಪರಶುರಾಮ್ ಆಚಾರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ , ಸುಭಾಷ್ ಚಂದ್ರು ಬೋಸ್, ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಪ್ರತಿಯೊಬ್ಬರೂ ದೇಶದ ಏಕತೆ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ, ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ವಿಶೇಷವಾಗಿ ಅಂಗವಿಕಲರ ಸಬಲೀಕರಣ, ಶಿಕ್ಷಣ ಹಾಗೂ ಸ್ವಾವಲಂಬನೆಗೆ ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ನೀಲೇಶ್ ಜೈನ್ ಹಾಗೂ ರಾಮಕೃಷ್ಣ ರೇಣುಗುಂಟ ಅವರು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಭೀಮಾರೆಡ್ಡಿ (ಎಂಐಎಸ್), ಕಾಸಯ್ಯ ಹಿರೇಮಠ (ಸಂಯೋಜಕರು), ಗೌತಮಿ (ಐಟಿ ತರಬೇತುದಾರರು), ರಾಧಿಕಾ ರಾಣಿ (ಇಂಗ್ಲಿಷ್ ತರಬೇತುದಾರರು), ರಾಮಾಂಜಿನೇಯ ಜಿ.ಎನ್. (ಎಚ್.ಇ. ಸಂಯೋಜಕರು), ಕಾಡಸಿದ್ದ (ಬಾಲಕರ ವಾರ್ಡನ್) ಹಾಗೂ ವಿಜಯಶಾಂತಿ (ಬಾಲಕಿಯರ ವಾರ್ಡನ್) ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನಡೆದ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು