ಬಳ್ಳಾರಿ: ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಐಇಸಿ ವಿಭಾಗದ ವತಿಯಿಂದ ಮೋಕಾ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನಿರ್ದೇಶನದ ಮೇರೆಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಡೆಂಗ್ಯೂ, ಚಿಕನ್ಗುನ್ಯಾ, ಕ್ಷಯರೋಗ, ಕುಷ್ಠರೋಗ, ಹೆಚ್ಪಿವಿ (HPV) ಲಸಿಕೆ ಹಾಗೂ ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ್, ಸಾಮಾನ್ಯ ಜ್ವರ ಎಂದು ನಿರ್ಲಕ್ಷ್ಯ ಮಾಡುವುದು ಅಪಾಯಕಾರಿ. ಮೂರು ದಿನಗಳಿಗೂ ಹೆಚ್ಚು ಜ್ವರ, ತೀವ್ರ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಕೀಲು ಹಾಗೂ ಮಾಂಸಖಂಡಗಳಲ್ಲಿ ತೀವ್ರ ನೋವು ಕಂಡುಬಂದರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆಯಂತೆ ಪರೀಕ್ಷೆ ಹಾಗೂ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಡೆಂಗ್ಯೂ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಣಕ್ಕಾಗಿ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡ ಸೇರಿದಂತೆ ನೀರು ಸಂಗ್ರಹಿಸುವ ಪಾತ್ರೆಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳ ಹಾಕಬೇಕು. ಬಳಕೆಯಲ್ಲದ ನೀರಿನ ಸಂಗ್ರಹ ಪಾತ್ರೆಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕರೆ ನೀಡಿದರು.
ಕ್ಷಯರೋಗದ ಲಕ್ಷಣಗಳಾದ ಎರಡು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ರಾತ್ರಿ ಬೆವರು, ಕಫದಲ್ಲಿ ರಕ್ತ, ಎದೆನೋವು, ತೂಕ ಇಳಿಕೆ ಹಾಗೂ ಉಸಿರಾಟದ ತೊಂದರೆ ಕಂಡುಬಂದರೆ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರಂಭದಲ್ಲಿಯೇ ಪತ್ತೆ ಹಚ್ಚಿದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದು ತಿಳಿಸಿದರು.
ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಸಾಧ್ಯತೆ ಇರುವುದರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಸರ್ಕಾರ ಉಚಿತವಾಗಿ HPV ಲಸಿಕೆ ನೀಡುತ್ತಿದೆ. ಪೋಷಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕುಷ್ಠರೋಗ ಶಾಪವಲ್ಲ, ಸೂಕ್ತ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖರಾಗಬಹುದು. ಮೈಮೇಲೆ ಸ್ಪರ್ಶಜ್ಞಾನವಿಲ್ಲದ ಬಿಳಿ ಅಥವಾ ತಾಮ್ರವರ್ಣದ ಮಚ್ಚೆಗಳು ಕಂಡುಬಂದರೆ ತಕ್ಷಣ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಕರ್ಜಗಿ, ಮೋಕಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.