ಡಾ. ವರ ಪ್ರಸಾದ್ ರಾವ್ ಪಿ ವಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯಕ್ಕೆ ಇದೀಗ ದೊಡ್ಡ ಗ್ರಹಣ ಹಿಡಿದಂತಾಗಿದೆ. ಬಡವರ ಹೊಟ್ಟೆ ತುಂಬಿಸಬೇಕಾದ ಪಡಿತರ ಅಕ್ಕಿ ವಿತರಣೆ ರಾಜ್ಯಾದ್ಯಂತ ಸಂಪೂರ್ಣವಾಗಿ ವಿಳಂಬವಾಗುತ್ತಿದ್ದು, ಕಳೆದ ಮೂರು ತಿಂಗಳಿಂದ ಸೃಷ್ಟಿಯಾಗಿರುವ ಈ ಸಮಸ್ಯೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿದ್ದಾರೆ.ಈ ತಿಂಗಳು ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ವಿಳಂಬವಾಗಿದೆ. ಜನರಿಗೆ ಇನ್ನೂ ಅಕ್ಕಿ ವಿತರಣೆಯಾಗಿಲ್ಲ.
ಸಾಮಾನ್ಯವಾಗಿ ಮೊದಲ ವಾರದಲ್ಲೇ ಅಕ್ಕಿ ವಿತರಣೆಯಾಗುತ್ತಿತ್ತು. ಆದರೆ, ಈ ತಿಂಗಳು ವಿಳಂಬವಾಗಿದೆ. ರಾಜ್ಯ ಪಡಿತರ ಆಹಾರ ಪದಾರ್ಥಗಳ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಪ್ರತಿ ತಿಂಗಳು ದಿನಾಂಕ 5ರ ಒಳಗಾಗಿ ಬಡವರ ಕೈ ಸೇರಬೇಕಾಗಿದ್ದ ಅಕ್ಕಿ ಇದೀಗ ಸರಿಯಾಗಿ ಸಿಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆ ಎಂಬ ಮಾತು ಕೇಳಿಬರುತ್ತಿದೆ. ಅನ್ನಭಾಗ್ಯದ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರ ಸಕಾಲಕ್ಕೆ ಹಣ ಪಾವತಿ ಮಾಡದ ಹಿನ್ನೆಲೆ, ಅಕ್ಕಿ ಪೂರೈಕೆ ಸಂಪೂರ್ಣ ಹಳಿ ತಪ್ಪಿದೆ.
ರಾಜ್ಯದಿಂದ 2.17 ಲಕ್ಷ ಮೆಟ್ರಿಕ್ ಟನ್ ಹಾಗೂ ಕೇಂದ್ರದಿಂದ 2.17 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬಿಡುಗಡೆಯಾಗುತ್ತಿತ್ತು. ಆದರೆ, ಈ ಬಾರಿ ವಿಳಂಬವಾಗಿದೆ. ಹೀಗಾಗಿ, ಸಚಿವರನ್ನು ಭೇಟಿ ಮಾಡಿ ಸಮಸ್ಯೆಯ ಬಗ್ಗೆ ಚರ್ಚಿಸಲು ಪಡಿತರ ವಿತರಕರ ಸಂಘ ಮುಂದಾಗಿದೆ ಎಂದು ರಾಜ್ಯ ಪಡಿತರ ಆಹಾರ ಪದಾರ್ಥಗಳ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಹೇಳದ್ದಾರೆ.
ನ್ಯಾಯಬೆಲೆ ಅಂಗಡಿಗಳ ಮುಂದೆ ಭಾರೀ ಕ್ಯೂ; ಗ್ರಾಹಕರ ಆಕ್ರೋಶ:
ಮಂಡ್ಯ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂಬ ಫಲಕ ಕಂಡು ಬಂದಿವೆ.
ನ್ಯಾಯಬೆಲೆ ಅಂಗಡಿಗಳ ಮುಂದೆ ಬೆಳಗ್ಗೆಯಿಂದಲೇ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು, ಹಲವು ಕಡೆ ಅಕ್ಕಿ ಲಭ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳು ಖಾಲಿ ಕೈಯಲ್ಲಿ ಮನೆಗೆ ಮರಳುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬೆಳವಣಿಗೆ ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಕುಟುಂಬಗಳಿಗೆ ಈ ವಿಳಂಬ ದೊಡ್ಡ ಹೊಡೆತವಾಗಿದೆ.
ಕೂಲಿ ನಾಲಿ ಮಾಡಿ ಬದುಕುವ ತಮಗೆ ರೇಷನ್ ಅಂಗಡಿ ಮುಂದೆ ಕಾಯುವುದೇ ಕೆಲಸವಾಗಿದೆ ಎಂದು ಪಡಿತರ ಗ್ರಾಹಕರಾದ ಶಿವಲೀಲಾ ಹಾಗೂ ನಾಗಮ್ಮ ಸೇರಿದಂತೆ ಹಲವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಅನ್ನಭಾಗ್ಯ ಯೋಜನೆ ಲಕ್ಷಾಂತರ ಬಡ ಕುಟುಂಬಗಳ ಆಹಾರ ಭದ್ರತೆಯ ಪ್ರಮುಖ ಆಧಾರವಾಗಿದೆ. ಹೀಗಾಗಿ ಅಕ್ಕಿ ವಿತರಣೆಯಲ್ಲಿ ಉಂಟಾಗಿರುವ ವಿಳಂಬವನ್ನು ಶೀಘ್ರವಾಗಿ ಸರಿಪಡಿಸುವುದು ಸರ್ಕಾರದ ಮುಂದೆ ದೊಡ್ಡ ಸವಾಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ಪುನರ್ ರಚನೆ ,ಬಿಡದಿ ಟೌನ್ಶಿಪ್ ರಾಜಕೀಯದಲ್ಲಿ ತಲ್ಲಣವಾಗಿದ್ದಾರೆ.
ಸದ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಇಕ್ಕಟ್ಟಿನಿಂದ ಬಡವರನ್ನು ಹೇಗೆ ಪಾರು ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.