ಬೆಂಗಳೂರು : ಯುವಜನರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದು, ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ಗುರುತಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಬೆಳೆಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಯುವ ದಿನದ ಅಂಗವಾಗಿ ಬಸವನಗುಡಿಯ ಸುರಾನಾ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಯುವಜನ ಮಹಿಳಾ ಮತ್ತು ಮಕ್ಕಳ ಸ್ಪಂದನ ಸೇವಾ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಬೆಂಗಳೂರು ನಗರ) ಹಾಗೂ ಡೆಮಾಕ್ರಸಿ ವಾರಿಯರ್ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕರ್ತವ್ಯ, ಜವಾಬ್ದಾರಿ, ಗುರಿ ಸಾಧನೆ ಹಾಗೂ ಮಾದಕ ವಸ್ತುಗಳಿಂದ ದೂರವಿರುವ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಸಂಚಾರ ದಕ್ಷಿಣ ಉಪವಿಭಾಗದ ಸಂಚಾರ ಪೊಲೀಸ್ ಅಧಿಕಾರಿ ಮಂಜುನಾಥ್, “ಯುವಶಕ್ತಿ ಎಂದರೆ ಕೇವಲ ವಯಸ್ಸಲ್ಲ; ಅದು ಸಮಾಜದಲ್ಲಿ ಅದ್ಭುತ ಬದಲಾವಣೆಯನ್ನು ತರಬಲ್ಲ ಕಿಡಿ. ಪ್ರತಿಯೊಬ್ಬ ಯುವಕ-ಯುವತಿಯೂ ಕಾನೂನಿನ ಬಗ್ಗೆ ತಿಳಿದುಕೊಂಡಾಗ ಮಾತ್ರ ದೇಶವನ್ನು ಭ್ರಷ್ಟಾಚಾರ ಮತ್ತು ಅಪರಾಧಗಳಿಂದ ಮುಕ್ತಗೊಳಿಸಲು ಸಾಧ್ಯ” ಎಂದು ಹೇಳಿದರು.
ನಟ ಮತ್ತು ನಿರ್ಮಾಪಕ ಗಂಡಸಿ ಸದಾನಂದಸ್ವಾಮಿ ಮಾತನಾಡಿ, ಸ್ವಾಮಿ ವಿವೇಕಾನಂದರ ಸಂದೇಶವನ್ನು ಸ್ಮರಿಸುತ್ತಾ, “ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮ ಕರ್ತವ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.
ವಕೀಲರಾದ ಜಯಶ್ರೀ ರಟ್ಟಿಹಳ್ಳಿ ಅವರು ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಕಾನೂನು ಅರಿವು ಮೂಡಿಸಿದರು. ಮಾದಕ ವಸ್ತುಗಳ ಬಳಕೆ, ಮಾರಾಟ, ಸಾಗಣೆ, ರಫ್ತು ಸೇರಿದಂತೆ ವಿವಿಧ ರೀತಿಯ ಅಪರಾಧಗಳಿಗೆ ಕಾನೂನಿನಲ್ಲಿ ಇರುವ ಕ್ರಮಗಳು ಹಾಗೂ ಶಿಕ್ಷೆಗಳ ಕುರಿತು ವಿವರಿಸಿದರು.
ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅನಿತಾ ಅವರು ಮಾತನಾಡಿ, ನಶಾಮುಕ್ತ ಭಾರತ ಅಭಿಯಾನದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರು ಮಾದಕ ವ್ಯಸನದಿಂದ ದೂರವಿದ್ದು, ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸೀ ಸ್ಕೌಟ್ಸ್ ಮತ್ತು ಗೈಡ್ಸ್ನ ಐ.ಪಿ. ಆಫೀಸರ್, ಬಿ-ಪ್ಯಾಕ್ ಸಿವಿಕ್ ಲೀಡರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾರಾ-ಲೀಗಲ್ ಸ್ವಯಂಸೇವಕಿ ದೀಪಿಕಾ ಎಂ. ಅವರು ಮಾತನಾಡಿ, “ಕೇವಲ ಪದವಿ ಪಡೆಯುವ ವಿದ್ಯಾರ್ಥಿಗಳಾಗದೆ, ದೇಶದ ಕಾನೂನನ್ನು ಗೌರವಿಸುವ ಜಾಗೃತ ನಾಗರಿಕರಾಗಬೇಕು. DLSAನಂತಹ ಸಂಸ್ಥೆಗಳ ನೆರವಿನಿಂದ ಸಮಾಜದಲ್ಲಿ ನ್ಯಾಯವನ್ನು ಎತ್ತಿಹಿಡಿಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುರಾನಾ ಕಾಲೇಜಿನ ಪ್ರಾಂಶುಪಾಲರಾದ ವೀಣಾ ಕೆ.ಎನ್., ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಗಿರೀಶ್ ಕೆ., ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.