ತುಮಕೂರು : ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಿಲ್ವರ್ ಜುಬ್ಲಿ ಸಂಭ್ರಮಾಚರಣೆ ಅಂಗವಾಗಿ ಹಾಗೂ ಎಫ್ಕೆಸಿಸಿಐ ಆಶ್ರಯದಲ್ಲಿ ಜೂನ್ 6 ಮತ್ತು 7 ರಂದು ಆಯೋಜಿಸಲಾದ ಜಿಲ್ಲಾ ಚೇಂಬರ್ಗಳ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದರು.
ಸಮ್ಮೇಳನದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ಎಫ್ಕೆಸಿಸಿಐ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆಯ ವಿವಿಧ ಸಮಸ್ಯೆಗಳು, ಕೈಗಾರಿಕಾ ಅಭಿವೃದ್ಧಿಗೆ ಅಗತ್ಯ ಕ್ರಮಗಳು ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸಂಬಂಧಿಸಿದ ಮನವಿಪತ್ರವನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಮ್ಮೇಳನದಲ್ಲಿ ಹ್ಯಾಲಿಸ್ ಬ್ಲೂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವಿಶೇಷ ಆಹ್ವಾನಿತರಾದ ಕೆ.ಎಂ. ಶಿವಮೂರ್ತಿ ಅವರಿಗೆ “ಉತ್ತಮ ಕೈಗಾರಿಕಾ ಉದ್ಯಮಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕೈಗಾರಿಕಾ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ. ಗಿರೀಶ್, ಆರ್. ನಾಗರಾಜ್, ಮತ್ತು ಜಿ. ಹನುಮೇಶ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದ ಈ ರಾಜ್ಯ ಮಟ್ಟದ ಸಮ್ಮೇಳನವು ಕೈಗಾರಿಕೆ, ವಾಣಿಜ್ಯ, ಹೂಡಿಕೆ, ಉದ್ಯಮಾಭಿವೃದ್ಧಿ ಹಾಗೂ ಉದ್ಯಮಿಗಳಿಗೆ ಎದುರಾಗುತ್ತಿರುವ ಸವಾಲುಗಳ ಕುರಿತು ಸಮಗ್ರ ಚರ್ಚೆಗೆ ವೇದಿಕೆಯಾಯಿತು. ವಿವಿಧ ಜಿಲ್ಲೆಗಳ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಸಲಹೆಗಳು ಹಾಗೂ ಶಿಫಾರಸುಗಳು ಸಮ್ಮೇಳನದಲ್ಲಿ ಮಂಡಿಸಲ್ಪಟ್ಟವು.