ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ವಹಿಸಿಕೊಂಡರು. ಜ್ಞಾನಭಾರತಿ ಆವರಣದ ಬೆಂಗಳೂರು ವಿಶ್ವವಿದ್ಯಾಲಯ ಆಡಳಿತ ಕಚೇರಿಯಲ್ಲಿ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರು (ಮೌಲ್ಯಮಾಪನ) ಆಗಿ ಕೂಡ ಸೇವೆ ಸಲ್ಲಿಸಿದ್ದ ಪ್ರೊ.ಸಿ.ಶಿವರಾಜು ಅವರು ಬೆಂಗಳೂರು ವಿಶ್ವವಿದ್ಯಾಲಯ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ನೂತನ ಕುಲಪತಿಯಾಗಿ ರಾಜ್ಯಪಾಲರು ಥಾವರ್ಚಂದ್ ಗೆಹ್ಲೋಟ್ ನೇಮಕ ಮಾಡಿ ಆದೇಶ ಹೊರಡಿಸಿದರು.
ಪ್ರೊ.ಸಿ.ಶಿವರಾಜ್ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿ "ಬೆಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಅಭಿವೃದ್ಧಿ, ವಿದ್ಯಾರ್ಥಿ ಸ್ನೇಹಿ ವಾತಾವರಣ, ನೌಕರರ ಪ್ರಗತಿಗೆ ಭವಿಷ್ಯದಲ್ಲಿ ಮತ್ತಷ್ಟು ಶ್ರಮಿಸುತ್ತೇನೆ" ಎಂದು ತಿಳಿಸಿದರು.
1994 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಂಸ್ಕೃತ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ಆರಂಭಿಸಿದರು. ಸಂಸ್ಕೃತ ಸಾಹಿತ್ಯ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಪರಿಣತಿ ಹೊಂದಿದ್ದಾರೆ. ಹಾಸ್ಟೆಲ್ ಪ್ರಧಾನ ಪಾಲಕರಾಗಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ವಿಶೇಷಾಧಿಕಾರಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಇವರ ಅವಧಿಯಲ್ಲಿ ವಿವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಕೋಚಿಂಗ್ ಕೋಚಿಂಗ್ ಕ್ಲಾಸ್ ಗಳನ್ನು ಆರಂಭಿಸಿದ್ದರು. ಇನ್ನೊಂದು ಪ್ರಮುಖವಾಗಿ ಸಂಶೋಧನಾ ವಿದ್ಯಾರ್ಥಿಗಳಿಗೆ ಗಣಕಯಂತ್ರಗಳನ್ನು ವಿವಿ ಕಡೆಯಿಂದ ಕೊಡಿಸುವ ಮೂಲಕ ಸಂಶೋಧನಾರ್ಥಿಗಳಿಗೆ ಅಚ್ಚುಮೆಚ್ಚಿನ ಹಾಗೂ ಹಳ್ಳಿ ಭಾಗದಿಂದ ಬಂದಂತ ಬಡ ವಿದ್ಯಾರ್ಥಿಗಳಿಗೆ ಸಹಾಯಹಸ್ತವನ್ನು ನೀಡುವ ಮೂಲಕ ಎಲ್ಲರ ಮನಸ್ಸಿನಲ್ಲಿ ಉಳಿಯುವ ಹೆಮ್ಮೆಯ ಪ್ರಾಧ್ಯಾಪಕರಾಗಿದ್ದಾರೆ.
ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿವಿಯಲ್ಲಿಯೇ ಅಧ್ಯಯನ ಮಾಡಿ, ಇಲ್ಲೇ ಪ್ರಾಧ್ಯಾಪಕರಾಗಿ ಮೌಲ್ಯಮಾಪನ ಕುಲಸಚಿವರಾಗಿ ಮತ್ತು ಬೆಂಗಳೂರು ವಿವಿಯಲ್ಲಿ ಫಸ್ಟ್ ಟೈಮ್ ಪ್ಯಾನೆಲ್ ಮತ್ತು ಫಸ್ಟ್ ಟೈಮ್ ಕುಲಪತಿಯಾಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇನ್ನೂ ದಲಿತ ಸಮುದಾಯದ ಪ್ರಥಮ ಕುಲಪತಿಯಾಗಿ ಆಯ್ಕೆಯಾಗಿದ್ದಕ್ಕೆ ಬೆಂಗಳೂರು ವಿವಿಯ ಎಲ್ಲಾ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳ ಅಭಿನಂದನೆ ಸಲ್ಲಿಸಿದ್ದಾರೆ.