LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬಳ್ಳಾರಿ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಶೇ. 101.2 ರಷ್ಟು ಪ್ರಗತಿ ಸಾಧನೆ

ಬಳ್ಳಾರಿ : ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಡಿ ಬಳ್ಳಾರಿ ಜಿಲ್ಲೆಯು ಅತ್ಯುತ್ತಮ ಸಾಧನೆ ಮಾಡಿದ್ದು, ನಿಗದಿತ ಗುರಿಗಿಂತಲೂ ಹೆಚ್ಚು ಅಂದರೆ ಶೇಕಡಾ 101.2 ರಷ್ಟು ಪ್ರಗತಿ ಸಾಧಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ತಿಳಿಸಿದ್ದಾರೆ.

ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆದ ಅಭಿಯಾನದಲ್ಲಿ ಜಿಲ್ಲೆಯ 5 ವರ್ಷದೊಳಗಿನ ಒಟ್ಟು 1,99,934 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, ಜಿಲ್ಲಾಡಳಿತದ ಸಕ್ರಿಯ ಪ್ರೋತ್ಸಾಹ ಹಾಗೂ ಆರೋಗ್ಯ ಇಲಾಖೆಯ ನಿರಂತರ ಶ್ರಮದಿಂದಾಗಿ ಒಟ್ಟು 2,02,387 ಮಕ್ಕಳಿಗೆ ಯಶಸ್ವಿಯಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಮಹತ್ತರ ಸಾಧನೆ ಮಾಡಲಾಗಿದೆ. ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು ಮತ್ತು ಕಂಪ್ಲಿ ತಾಲೂಕುಗಳಲ್ಲಿ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆದಿದೆ.

 

ತಾಲೂಕುವಾರು ಪ್ರಗತಿ ವಿವರ:

ಬಳ್ಳಾರಿ ತಾಲೂಕು: 95,879 ಗುರಿ, 96,741 ಮಕ್ಕಳಿಗೆ ಲಸಿಕೆ (ಶೇ. 100.9 ಪ್ರಗತಿ).

ಕಂಪ್ಲಿ ತಾಲೂಕು: 14,627 ಗುರಿ, 15,368 ಮಕ್ಕಳಿಗೆ ಲಸಿಕೆ (ಶೇ. 105.1 ಪ್ರಗತಿ).

ಕುರುಗೋಡು ತಾಲೂಕು: 17,241 ಗುರಿ, 17,483 ಮಕ್ಕಳಿಗೆ ಲಸಿಕೆ (ಶೇ. 101.4 ಪ್ರಗತಿ).

ಸಂಡೂರು ತಾಲೂಕು: 35,818 ಗುರಿ, 36,363 ಮಕ್ಕಳಿಗೆ ಲಸಿಕೆ (ಶೇ. 101.5 ಪ್ರಗತಿ).

ಸಿರುಗುಪ್ಪ ತಾಲೂಕು: 36,369 ಗುರಿ, 36,432 ಮಕ್ಕಳಿಗೆ ಲಸಿಕೆ (ಶೇ. 100.2 ಪ್ರಗತಿ).

news_1783076001_1_839.webp

 

ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಿಸುವ ದಿಸೆಯಲ್ಲಿ ಜಿಲ್ಲಾದ್ಯಂತ 335 ಕ್ಲಿಷ್ಟಕರ ಪ್ರದೇಶಗಳನ್ನು ಗುರುತಿಸಲಾಗಿತ್ತು. ಇಂತಹ ಸ್ಥಳಗಳಲ್ಲಿ ಲಸಿಕೆ ನೀಡಲು 236 ವಿಶೇಷ ತಂಡಗಳನ್ನು ಸಿದ್ಧಗೊಳಿಸಲಾಗಿತ್ತು. ಒಟ್ಟಾರೆಯಾಗಿ 977 ಪೋಲಿಯೋ ಬೂತ್ಗಳು ಹಾಗೂ 615 ಮನೆ ಭೇಟಿ ತಂಡಗಳು ಕಾರ್ಯನಿರ್ವಹಿಸಿದವು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚು ಸೇರುವ ಸಂತೆ, ಮಾರುಕಟ್ಟೆ, ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 50 ತಂಡಗಳನ್ನು ನಿಯೋಜಿಸಲಾಗಿತ್ತು. ಇದರೊಂದಿಗೆ ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳಗಳು ಮತ್ತು ಕುರಿಹಟ್ಟಿ ಮುಂತಾದ ಕಡೆಗಳಲ್ಲಿ ಲಸಿಕೆ ತಲುಪಿಸಲು 15 ಸಂಚಾರಿ (ಮೊಬೈಲ್) ತಂಡಗಳ ಮೂಲಕ ಯಶಸ್ವಿ ಸಾಧನೆ ಮಾಡಲಾಗಿದೆ.

ಬೃಹತ್ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ವ್ಯಾಕ್ಸಿನೇಟರ್ಗಳಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಮೇಲ್ವಿಚಾರಣೆಗಾಗಿ 188 ಮೇಲ್ವಿಚಾರಕರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಶ್ರಮಿಸಿದ್ದಾರೆ.

news_1782185829_0_963.webp

 

ಜಿಲ್ಲಾಡಳಿತದಿಂದ ಕೃತಜ್ಞತೆ:

ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ಮತ್ತು ಜಿಲ್ಲಾಡಳಿತದ ಸಂಪೂರ್ಣ ಬೆಂಬಲದೊಂದಿಗೆ, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮೈಲಿಗಲ್ಲನ್ನು ಸಾಧಿಸಲಾಗಿದೆ. ಅಭಿಯಾನದ ಯಶಸ್ಸಿಗಾಗಿ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬರಿಗೂ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಪರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಅಭಿನಂದನೆ ತಿಳಿಸಿದ್ದಾರೆ.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST