ಬಳ್ಳಾರಿ : ನಗರದ ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಆಂದ್ರಾಳ್ ಹಳ್ಳದಲ್ಲಿ ಪತ್ತೆಯಾದ ಮಹಿಳೆಯ ಮೃತದೇಹ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೃತರನ್ನು ಮೋತಿ ಸರ್ಕಲ್ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಹನೀಫ್ ಫಾತಿಮಾ ಎಂದು ಗುರುತಿಸಲಾಗಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಫಾತಿಮಾ ಅವರು ನಿನ್ನೆ ರಾತ್ರಿ ತಮ್ಮ ಸಹೋದ್ಯೋಗಿಗಳೊಂದಿಗೆ ಅಲ್ಲಂ ಭವನ ಹೋಟೆಲ್ನಲ್ಲಿ ಊಟ ಮಾಡಿದ್ದರು. ಊಟದ ಬಳಿಕ ಸಹೋದ್ಯೋಗಿಗಳು ಅವರನ್ನು ಮೋತಿ ಸರ್ಕಲ್ ಸಮೀಪಕ್ಕೆ ಕರೆತಂದು ಬಿಟ್ಟಿದ್ದು, ಅಲ್ಲಿ ನಿಲ್ಲಿಸಿದ್ದ ತಮ್ಮ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಮನೆಗೆ ತೆರಳಲು ಹೊರಟಿದ್ದರು ಎನ್ನಲಾಗಿದೆ.
ರಾತ್ರಿ ಸುರಿದ ಭಾರಿ ಮಳೆಯ ನಡುವೆ ಅವರು ಹೇಗೆ ಆಂದ್ರಾಳ್ ಹಳ್ಳದ ಪ್ರದೇಶಕ್ಕೆ ತಲುಪಿದರು, ಇದು ಅಪಘಾತವೇ, ಆತ್ಮಹತ್ಯೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಕಳೆದ ರಾತ್ರಿ ಬಳ್ಳಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮೃತದೇಹ ಮಳೆ ನೀರಿನೊಂದಿಗೆ ಬೇರೆ ಪ್ರದೇಶದಿಂದ ಕೊಚ್ಚಿಕೊಂಡು ಬಂದಿರಬಹುದೇ ಅಥವಾ ಮಹಿಳೆಯನ್ನು ಕೊಲೆ ಮಾಡಿ ಹಳ್ಳಕ್ಕೆ ಎಸೆದಿರಬಹುದೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಘಟನೆ ಸ್ಥಳಕ್ಕೆ ನೂರಾರು ಸಾರ್ವಜನಿಕರು ಆಗಮಿಸಿ ವೀಕ್ಷಣೆ ನಡೆಸಿದರು. ಮೃತದೇಹವು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣದ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಸದ್ಯ ಪೊಲೀಸರು ಫಾತಿಮಾ ಅವರ ಕೊನೆಯ ಚಲನವಲನಗಳು, ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.