ಬಳ್ಳಾರಿ: ಲಯನ್ಸ್ ಕ್ಲಬ್ ಆಫ್ ಬಳ್ಳಾರಿ ಸಂಸ್ಥೆ ವತಿಯಿಂದ ನಗರದ ಲಯನ್ಸ್ ಸೇವಾ ಸದನದ ಟಿ.ವಿ. ಬದ್ರಿ ಮೆಮೋರಿಯಲ್ ಹಾಲ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಸಮರ್ಪಣಾ ಮನೋಭಾವ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಆಯ್ದ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಶಿಕ್ಷಕರು ಸಮಾಜದ ನಿರ್ಮಾತೃಗಳಾಗಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಧ್ಯಕ್ಷ ಲಯನ್ ಮಲ್ಲಿಕಾರ್ಜುನ ಎಸ್.ಬಿ. ತಿಳಿಸಿದರು.
ಲಯನ್ಸ್ ಕ್ಲಬ್ ಆಫ್ ಬಳ್ಳಾರಿಯು ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಜನಸೇವೆಯಲ್ಲಿ ತೊಡಗಿಸಿಕೊಳ್ಳಲು, ಸಮಾಜದ ಹಿತೈಷಿಗಳು ಹಾಗೂ ಸೇವಾಭಿಮಾನಿಗಳು ತಮ್ಮ ಪ್ರೋತ್ಸಾಹ, ಸಹಕಾರ ಮತ್ತು ದೇಣಿಗೆಯ ಮೂಲಕ ಕೈಜೋಡಿಸಬೇಕೆಂದು ವಿನಂತಿಸಿದರು. ಅಲ್ಲದೇ ಸಮಾಜ ಸೇವಾ ಕಾರ್ಯಗಳಿಗೆ ದೇಣಿಗೆ ನೀಡಲು ಹಾಗೂ ಸಹಕಾರ ನೀಡಲು ಇಚ್ಛಿಸುವವರು ಲಯನ್ಸ್ ಕ್ಲಬ್ ಆಫ್ ಬಳ್ಳಾರಿಯನ್ನು ಸಂಪರ್ಕಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಲಯನ್ ಕಲ್ಯಾಣ ಚಕ್ರವರ್ತಿ ಎ., ಖಜಾಂಚಿ ಲಯನ್ ಅಕ್ಕಿ ಶರಣ ಬಸವ ಸೇರಿದಂತೆ ಕ್ಲಬ್ನ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.