ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ಜು.26ರ ಭಾನುವಾರ ಆಯೋಜಿಸಿದ್ದು, ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ
ಸಂಖ್ಯೆಯಲ್ಲಿ ಪಾಲ್ಗೊಂಡು ಅಗಲಿದ ನಾಯಕನ ಸೇವೆ ಸ್ಮರಿಸಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ಹಿರಿಯೂರಿನ ನೆಹರು ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಡಿ.ಸುಧಾಕರ್ ಎಲ್ಲ ಜಾತಿ-ಧರ್ಮದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚಳ್ಳಕೆರೆ-ಹಿರಿಯೂರು ಕ್ಷೇತ್ರದಲ್ಲಿ ನಿರಂತರ ಗೆಲುವು ಸಾಧಿಸಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸೇವೆ ಸ್ಮರಣೀಯ ಎಂದರು.
ಎರಡು ಬಾರಿ ಮಂತ್ರಿ, ಒಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವರು ಜಿಲ್ಲೆಯ ಸಮಗ್ರ ಪ್ರಗತಿಗೆ ಅವಿರತವಾಗಿ ಶ್ರಮಿಸುತ್ತಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ
ಮಹಿಳೆ, ರೈತರು, ಅಶಕ್ತ ವರ್ಗದ ಜನರ ನೆರವಿಗೆ ಧಾವಿಸುತ್ತಿದ್ದರು. ಆದರೆ, ಮಂಡಿ ನೋವು
ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿ ಶ್ವಾಶಕೋಶದ ತೊಂದೆಯಿಂದ ನಮ್ಮನ್ನು ಅಗಲಿದ್ದು ಅತ್ಯಂತ ನೋವು. ಈಗ ಅವರ ಸೇವೆ ಸ್ಮರಿಸುವ ಕಾರ್ಯದೊಂದಿಗೆ ಅವರಿಗೆ ನುಡಿನಮನ ಸಲ್ಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ತಿಳಿಸಿದರು.
ಆದ್ದರಿಂದ ಜು.26ರ ಭಾನುವಾರ ಹಿರಿಯೂರಿನ ನೆಹರು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ
ಆಯೋಜಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ
ಸಕಲ ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಡಿಸಿಎಂ ಡಾ.ಜಿ.ಪರಮೇಶ್ವರ್
ಸೇರಿ ಅನೇಕ ಸಚಿವರು, ಶಾಸಕರು, ಸಂಸದರು, ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ನಾಡಿನ ಅಪರೂಪದ ರಾಜಕಾರಣಿ ಆಗಿದ್ದ ಡಿ.ಸುಧಾಕರ್ ನುಡಿನಮನ
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಅವರ ಅಭಿಮಾನಿಗಳು, ಕಾರ್ಯಕರ್ತರು, ಬೆಂಬಲಿಗರು
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.