ಬಳ್ಳಾರಿ : ನಿರಂತರವಾಗಿ ಸುರಿದ ಮಳೆಯಿಂದ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮೀಪದ ತುಂಗಭದ್ರಾ ಕಾಲುವೆ ದಂಡೆಯ ಮಣ್ಣು ಸವೆದು ಕುಸಿದಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಲುವೆಯ ಪಕ್ಕದಲ್ಲಿರುವ ರಸ್ತೆ ಬದಿಯ ಮಣ್ಣು ದೊಡ್ಡ ಪ್ರಮಾಣದಲ್ಲಿ ಕೊಚ್ಚಿಕೊಂಡು ಹೋಗಿದ್ದು, ರಕ್ಷಣಾ ತಡೆಗೋಡೆಯ ಕೆಳಭಾಗ ಸಂಪೂರ್ಣವಾಗಿ ಟೊಳ್ಳಾಗಿದೆ. ಇದರಿಂದ ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಮತ್ತಷ್ಟು ಮಳೆ ಸುರಿದರೆ ದಂಡೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ವಾಹನ ಸಂಚಾರಕ್ಕೂ ಅಪಾಯ ಎದುರಾಗುವ ಭೀತಿ ಇದೆ.

ಮಳೆಗಾಲದಲ್ಲಿ ಇಂತಹ ಕುಸಿತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ತಕ್ಷಣ ತಾಂತ್ರಿಕ ಪರಿಶೀಲನೆ ನಡೆಸಿ ದಂಡೆ ಬಲಪಡಿಸುವ ಕಾಮಗಾರಿ ಆರಂಭಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಅಪಾಯದ ಪ್ರದೇಶವನ್ನು ಸುರಕ್ಷಿತಗೊಳಿಸುವ ಜೊತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.