ಹಿರಿಯೂರು: ಹಿರಿಯೂರು ತಾಲೂಕಿನ ಗಾಂಧಿನಗರ (ಗುಂಜಲಗುಂಟೆ) ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. 250ಕ್ಕೂ ಹೆಚ್ಚು ಕುಟುಂಬಗಳಿರುವ ಗ್ರಾಮವು ಎರಡು ಬೋರ್ವೆಲ್ಗಳನ್ನೇ ಅವಲಂಬಿಸಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಟ್ಯಾಂಕರ್ ಮೂಲಕ ನೀರು ಪೂರೈಸಿದರೂ ಸಮರ್ಪಕವಾಗಿ ನೀರು ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಟ್ಯಾಂಕರ್ ಮೂಲಕ ಸಮರ್ಪಕ ನೀರು ಪೂರೈಸಿ, ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಹಿರಿಯೂರು ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.